ಮಸ್ಕಿ ವಿಧಾನಸಭೆಗೆ ಉಪಚುನಾವಣೆ: ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಧಿಕಾರಿ ಸೂಚನೆ
ರಾಯಚೂರು,ಮಾ.17:- ಕೇಂದ್ರ ಚುನಾವಣಾ ಆಯೋಗವು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ದಿನಾಂಕ ಘೋಷಿಸಿದ್ದು, ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಅವರು ತಿಳಿಸಿದರು.
ಅವರು ಮಾ.17ರ ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಸ್ಕಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯ ನೀತಿ ಸಂಹಿತೆ ಪಾಲಿಸುವ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರೊAದಿಗೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಾದರಿ ನೀತಿ ಸಂಹಿತೆ ನಿಯಮಗಳನ್ನು ವಿವಿಧ ಪಕ್ಷಗಳ ಅಭ್ಯರ್ಥಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಧಾರ್ಮಿಕ ಕೇಂದ್ರಗಳಲ್ಲಿ ಪ್ರಚಾರ ಮಾಡುವುಂತಿಲ್ಲ ಮತ್ತು ಧಾರ್ಮಿಕ ಭಾವನೆಗಳಿಗೆ ದಕ್ಕೆಯಾಗುವಂತಹ ಭಾಷಣೆ, ಹೇಳಿಕೆ ನೀಡುವುಂತಿಲ್ಲ. ಪಕ್ಷದ ಅಭ್ಯರ್ಥಿಗಳು ಚುನಾವಣೆ ಖರ್ಚು ವೆಚ್ಚದ ಬಗ್ಗೆ ಸಕಾಲಕ್ಕೆ ಮಾಹಿತಿ ನೀಡಬೇಕು. ಅಭ್ಯರ್ಥಿ ಮತ್ತು ಪಕ್ಷದ ವತಿಯಿಂದ ಚುನಾವಣೆಗೆ ಖರ್ಚು ಮಾಡುತ್ತಿರುವ ವೆಚ್ಚ ನಿರ್ವಹಣೆ ಮಾಡಲು ಪ್ರತ್ಯೇಕ ಬ್ಯಾಂಕ್ ಖಾತೆ ತೆರೆಯಬೇಕು. ಪಕ್ಷ ಮತ್ತು ಅಭ್ಯರ್ಥಿಗಳ ಖರ್ಚು ವೆಚ್ಚದ ಬಗ್ಗೆ ಮೇಲ್ವಿಚಾರಣೆ ಮಾಡಲು ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿಯನ್ನು ನೇಮಿಸಲಾಗುವುದು ಎಂದರು.
ನೀತಿ ಸಂಹಿತೆಯಿರುವ ಕಾರಣ ಯಾವುದೇ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಅಡಿಗಲ್ಲು ಸಮಾರಂಭಗಳನ್ನು ಮಾಡುವುಂತಿಲ್ಲ. ಕಾನೂನು ಸುವ್ಯವಸ್ಥೆ ಮತ್ತು ಪ್ರಕೃತಿ ವಿಕೋಪಕ್ಕೆ ಸಂಬAಧಿಸದAತೆ ಸಭೆಗಳನ್ನು ಮಾತ್ರ ನಡೆಸಲು ಅವಕಾಶ ಇರುತ್ತದೆ. ಚುನಾವಣೆಯ ಬಹಿರಂಗ ಪ್ರಚಾರ, ರ್ಯಾಲಿ, ರೋಡ್ ಶೋಗೆ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಇಲ್ಲದಿದ್ದರೆ ಪ್ರಕರಣ ದಾಖಲಿಸಬೇಕಾಗುತ್ತದೆ. ಚುನಾವಣೆಯಲ್ಲಿ ವಾಹನಗಳನ್ನು ಬಳಕೆ ಮಾಡುವುದಕ್ಕೆ ಸಹ ಕಡ್ಡಾಯ ಪರವಾನಿಗೆ ಪಡೆಯಬೇಕು. ಲಿಂಗಸೂಗೂರು, ಸಿಂಧನೂರು ಮತ್ತು ಮಸ್ಕಿ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬAಧಿಸಿ ಯಾವುದೇ ಸಭೆ, ಸಮಾರಂಭಗಳನ್ನು ನಿರ್ವಹಿಸಬೇಕಾದರೆ ಲಿಂಗಸೂಗೂರು ಸಹಾಯಕ ಆಯುಕ್ತರಿಂದ ಅನುಮತಿ ಪಡೆಯಬೇಕು ಎಂದು ತಿಳಿಸಿದರು.
ಪಕ್ಷದ ಕಾರ್ಯಾಲಯದಲ್ಲಿ ಕೇವಲ ಕಾರ್ಯಕರ್ತರು ಮಾತ್ರ ಸಭೆ ನಡೆಸಬೇಕು. ಮತದಾರರು ಸೆಳೆಯಲು ಯಾವುದೇ ಆಸೆ ಅಮಿಷವೊಡ್ಡರೆ ಪ್ರಕರಣ ದಾಖಲಿಸಬೇಕಾಗುತ್ತದೆ. ಬಹಿರಂಗ ಸಭೆ, ರ್ಯಾಲಿಗಳಲ್ಲಿ ಬಳಸುವ ಮೈಕ್, ಬ್ಯಾಂಡ್ ಬಾಜಾ ಸೇರಿದಂತೆ ಪ್ರತಿಯೊಂದಕ್ಕೂ ಶುಲ್ಕ ನಿಗದಿಪಡಿಸಲಾಗಿದೆ, ಚುನಾವಣೆಯನ್ನು ಪಾರದರ್ಶಕವಾಗಿ ನಿರ್ವಹಿಸಲು ರಾಜಕೀಯ ಪಕ್ಷಗಳ ಮುಖಂಡರು ಸಹಕಾರ ನೀಡುವಂತೆ ಅವರು ಕೋರಿದರು.
ಅಪರ ಜಿಲ್ಲಾಧಿಕಾರಿ ಕೆ.ಆರ್. ದುರಗೇಶ್, ಚುನಾವಣಾ ಶಾಖೆಯ ಅಧಿಕಾರಿಗಳು ಮತ್ತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

