ಲಾಕ್ ಡೌನ್: ರಾಜ್ಯಾದ್ಯಂತ ಮೇ 23ರವರಗೆ ಸಬ್ ರಿಜಿಸ್ಟ್ರಾರ್ ಕಚೇರಿ ಸ್ಥಗಿತ
ಬೆಂಗಳೂರು, ಮೇ 11: ರಾಜ್ಯದಲ್ಲಿ ಕೊರೋನ ಸೋಂಕು ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಮೇ 23ರವರೆಗೆ ರಾಜ್ಯದ ಎಲ್ಲ ಜಿಲ್ಲಾ ನೋಂದಣಿ ಮತ್ತು ಉಪನೋಂದಣಿ ಕಚೇರಿಗಳಲ್ಲಿ ಚಟುವಟಿಕೆ ಸ್ಥಗಿತಗೊಳಿಸಲಾಗಿದೆ.
ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದು, ಸಬ್ ರಿಜಿಸ್ಟ್ರಾರ್ ಕಚೇರಿಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿರಬೇಕು ಎಂದು ತಿಳಿಸಲಾಗಿದೆ.
ಕೊರೋನ ಸೋಂಕು ಉಲ್ಬಣಿಸುತ್ತಿದ್ದರೂ ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದವು, ಜನರು ಸಹ ನೋಂದಣಿಗೆ ಬರುತ್ತಿದ್ದರು. ನೋಂದಣಿ ಪ್ರಕ್ರಿಯೆ ಸಂದರ್ಭದಲ್ಲಿ ಅನಿವಾರ್ಯವಾಗಿ ಬಯೋ ಮೆಟ್ರಿಕ್ ಮಾಡಿಸಲು, ಫೋಟೊ ತೆಗೆಯಲು ಮಾಸ್ಕ್ ತೆಗೆಯಬೇಕಾಗಿತ್ತು. ಇದರ ವಿರುದ್ಧ ಸಾರ್ವಜನಿಕರಲ್ಲಿ ಮತ್ತು ಇಲಾಖೆ ಅಧಿಕಾರಿಗಳು-ಸಿಬ್ಬಂದಿಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು.
ಕೊರೋನ ಸೋಂಕಿನಿಂದಾಗಿ ಸಬ್ರಿಜಿಸ್ಟ್ರಾರ್ ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಇದರ ಬಗ್ಗೆ ಹಿರಿಯ ಅಧಿಕಾರಿಗಳ ಅಭಿಪ್ರಾಯ ಪಡೆದು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತರು, ಮೇ 23ರವರೆಗೆ ಕಚೇರಿಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
